ಹಾಸನ: ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಯುವಕನ ಬ್ರೈನ್ ಡೆಡ್ ಆದ ಹಿನ್ನಲೆಯಲ್ಲಿ, ಆತನ ಅಂಗಾಂಗಗಳನ್ನು ದಾನ ಮಾಡುವ ಮೂಲಕ ಪೋಷಕರು ಮಾನವೀಯತೆ ಮೆರೆದಿದ್ದಾರೆ.
ಚನ್ನರಾಯಪಟ್ಟಣ ತಾಲ್ಲೂಕಿನ ಸಾಗತವಳ್ಳಿ ಗ್ರಾಮದ ನಂಜಮ್ಮ ಹಾಗೂ ನಂಜುಂಡೇಗೌಡ ಅವರ ಪುತ್ರ ಯೋಗೇಶ್ (35) ಕಳೆದ ಆರು ದಿನಗಳ ಹಿಂದೆ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಆರಂಭದಲ್ಲಿ ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾದ ಅವರನ್ನು ನಂತರ ಹಿಮ್ಸ್ಗೆ, ಬಳಿಕ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆರೋಗ್ಯ ಸ್ಥಿತಿ ಮತ್ತಷ್ಟು ಚಿಂತಾಜನಕವಾಗಿದ್ದ ಹಿನ್ನೆಲೆಯಲ್ಲಿ ಪುನಃ ಹಿಮ್ಸ್ಗೆ ದಾಖಲಿಸಲಾಗಿತ್ತು.
ವೈದ್ಯರು ಯೋಗೇಶ್ ಬ್ರೈನ್ ಡೆಡ್ ಎಂದು ಘೋಷಿಸಿದ ನಂತರ, ದುಃಖದ ನಡುವೆಯೂ ಪೋಷಕರು ಅಂಗಾಂಗ ದಾನಕ್ಕೆ ಒಪ್ಪಿಗೆ ನೀಡಿದರು. ಯೋಗೇಶ್ ಅವರ ಲಿವರ್ ಹಾಗೂ ಹಾರ್ಟ್ ವಾಲ್ವ್ಗಳನ್ನು ದಾನ ಮಾಡಲಾಗಿದ್ದು, ಝೀರೋ ಟ್ರಾಫಿಕ್ ವ್ಯವಸ್ಥೆಯೊಂದಿಗೆ ಅಂಬ್ಯುಲೆನ್ಸ್ ಮೂಲಕ ಮೈಸೂರಿನ ಖಾಸಗಿ ಆಸ್ಪತ್ರೆಗೆ ಅಂಗಾಂಗಗಳನ್ನು ರವಾನೆ ಮಾಡಲಾಯಿತು.
